ಪ್ರೇಷಿತರ ಕಾರ್ಯಕಲಾಪಗಳು 3
3
ನಿಂತು ನೆಗೆದಾಡಿದ ಹುಟ್ಟುಕುಂಟ
1ಒಂದು ದಿನ ಮಧ್ಯಾಹ್ನ ಮೂರು ಗಂಟೆಯ ಸಮಯ. ಅದು ಪ್ರಾರ್ಥನಾವೇಳೆ. ಪೇತ್ರ ಮತ್ತು ಯೊವಾನ್ನ ಮಹಾದೇವಾಲಯಕ್ಕೆ ಹೋದರು. 2‘ಸುಂದರದ್ವಾರ’ ಎಂದು ಕರೆಯಲಾದ ಬಾಗಿಲ ಬಳಿ ಹುಟ್ಟುಕುಂಟನೊಬ್ಬ ಇದ್ದನು. ಅವನನ್ನು ಪ್ರತಿದಿನ ಹೊತ್ತುತಂದು ಈ ದ್ವಾರದ ಬಳಿ ಬಿಡಲಾಗುತ್ತಿತ್ತು. ಅವನು ದೇವಾಲಯಕ್ಕೆ ಬರುತ್ತಿದ್ದ ಜನರಿಂದ ಭಿಕ್ಷೆಬೇಡುತ್ತಿದ್ದನು. 3ಪೇತ್ರ ಮತ್ತು ಯೊವಾನ್ನ ದೇವಾಲಯದೊಳಗೆ ಹೋಗುತ್ತಿರುವುದನ್ನು ಅವನು ಕಂಡನು. ತನಗೆ ಏನಾದರೂ ಭಿಕ್ಷೆ ಕೊಡಬೇಕೆಂದು ಬೇಡಿದನು. 4ಅವರು ಕುಂಟನನ್ನು ತದೇಕ ದೃಷ್ಟಿಯಿಂದ ಈಕ್ಷಿಸಿದರು. ಪೇತ್ರನು,. “ಎಲ್ಲಿ, ನಮ್ಮನ್ನು ನೋಡು,” ಎಂದನು. 5ಕುಂಟನು ಅವರಿಂದ ಭಿಕ್ಷೆಯನ್ನು ಅಪೇಕ್ಷಿಸುತ್ತಾ ಅವರನ್ನೇ ನೋಡಿದನು. 6ಆದರೆ ಪೇತ್ರನು, “ಹಣಕಾಸೇನೂ ನನ್ನಲ್ಲಿಲ್ಲ, ನನ್ನಲ್ಲಿ ಇರುವುದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸುಕ್ರಿಸ್ತರ ಹೆಸರಿನಲ್ಲಿ ನಾನು ಆಜ್ಞಾಪಿಸುತ್ತೇನೆ, ಎದ್ದು ನಡೆ” ಎನ್ನುತ್ತಾ. 7ಅವನ ಬಲಗೈಯನ್ನು ಹಿಡಿದು ನಿಲ್ಲಲು ಸಹಾಯಮಾಡಿದನು. ಆ ಕ್ಷಣವೇ ಕುಂಟನ ಅಂಗಾಲು ಮುಂಗಾಲುಗಳು ಬಲಗೊಂಡವು. 8ಅವನು ಜಿಗಿದುನಿಂತು ಅತ್ತಿತ್ತ ನಡೆದಾಡಲು ಪ್ರಾರಂಭಿಸಿದನು. ಅನಂತರ ಅವನು ಕುಣಿಯುತ್ತಾ ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಅವರೊಡನೆಯೇ ದೇವಾಲಯದೊಳಗೆ ಹೋದನು. 9ಅವನು ಹೀಗೆ ನಡೆಯುವುದನ್ನೂ ದೇವರನ್ನು ಕೊಂಡಾಡುವುದನ್ನೂ ಜನಸಮೂಹ ನೋಡಿತು. 10ದೇವಾಲಯದ ಸುಂದರದ್ವಾರದ ಬಳಿ ಕುಳಿತು ಭಿಕ್ಷೆಬೇಡುತ್ತಿದ್ದವನು ಇವನೇ ಎಂದು ಜನರು ಗುರುತು ಹಚ್ಚಿದರು. ಅವನಿಗೆ ಸಂಭವಿಸಿದ್ದನ್ನು ಕಂಡು ಬೆಕ್ಕಸಬೆರಗಾದರು.
ಪೇತ್ರನ ಪ್ರವಚನ
11‘ಸೊಲೊಮೋನನ ಮಂಟಪ’ದಲ್ಲಿ ಪೇತ್ರ ಮತ್ತು ಯೊವಾನ್ನರ ಜೊತೆ ಆ ಭಿಕ್ಷುಕನು ಇನ್ನೂ ನಿಂತಿದ್ದನು. ಆಶ್ಚರ್ಯಭರಿತರಾದ ಜನರು ಅಲ್ಲಿಗೆ ಓಡಿಬಂದರು. 12ಇದನ್ನು ನೋಡಿ ಪೇತ್ರನು ಇಂತೆಂದನು: “ಇಸ್ರಯೇಲಿನ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನಮ್ಮನ್ನೇಕೆ ಎವೆಯಿಕ್ಕದೆ ನೋಡುತ್ತಿದ್ದೀರಿ? ನಮ್ಮ ಸ್ವಂತ ಶಕ್ತಿಯಿಂದಾಗಲೀ ಭಕ್ತಿಯಿಂದಾಗಲೀ, ಈ ಮನುಷ್ಯನು ನಡೆಯುವಂತೆ ನಾವು ಮಾಡಿದೆವೆಂದು ಭಾವಿಸುತ್ತೀರೋ? 13ಪಿತಾಮಹ ಅಬ್ರಹಾಮ, ಇಸಾಕ ಮತ್ತು ಯಕೋಬರ ದೇವರು, ಅಂದರೆ ನಮ್ಮ ಪೂರ್ವಜರ ದೇವರು, ತಮ್ಮ ದಾಸ ಯೇಸುವಿನ ಮಹಿಮೆಯನ್ನು ಬೆಳಗಿಸಿದ್ದಾರೆ. ನೀವಾದರೋ ಅವರನ್ನು ಅಧಿಕಾರಿಗಳ ಕೈಗೊಪ್ಪಿಸಿದಿರಿ. ರಾಜ್ಯಪಾಲ ಪಿಲಾತನು ಅವರನ್ನು ಬಿಡುಗಡೆಮಾಡಲು ನಿರ್ಧರಿಸಿದಾಗ ಕೂಡ ಅವನ ಸಮ್ಮುಖದಲ್ಲೇ ಅವರನ್ನು ಧಿಕ್ಕರಿಸಿದಿರಿ. 14ಯೇಸು ಪುನೀತರು ಹಾಗೂ ಸತ್ಯಸ್ವರೂಪರು.#3:14 ಅಥವಾ : ನೀತಿಸ್ವರೂಪರು. ಆದರೂ ನೀವು ಅವರನ್ನು ನಿರಾಕರಿಸಿ, ಒಬ್ಬ ಕೊಲೆಗಡುಕನನ್ನೇ ನಿಮಗೆ ಬಿಟ್ಟುಕೊಡುವಂತೆ ಪಿಲಾತನನ್ನು ಬೇಡಿಕೊಂಡಿರಿ. 15ಜೀವದೊಡೆಯನನ್ನು ನೀವು ಕೊಂದುಹಾಕಿದಿರಿ; ದೇವರು ಅವರನ್ನು ಪುನರುತ್ಥಾನಗೊಳಿಸಿದರು. ಇದಕ್ಕೆ ನಾವೇ ಸಾಕ್ಷಿಗಳು. 16ನಿಮ್ಮ ಕಣ್ಣೆದುರಿಗಿರುವ ಈ ಮನುಷ್ಯನು ಯಾರೆಂದು ನಿಮಗೆ ಗೊತ್ತಿದೆ. ಯೇಸುವಿನ ನಾಮದಿಂದಲೇ, ಆ ನಾಮದ ಮೇಲಿಟ್ಟ ವಿಶ್ವಾಸದಿಂದಲೇ, ಈತನು ಶಕ್ತಿಪಡೆದಿದ್ದಾನೆ. ಯೇಸುವಿನಲ್ಲಿಟ್ಟ ಆ ವಿಶ್ವಾಸವೇ ಈತನಿಗೆ, ನೀವೇ ನೋಡುವಂತೆ, ಸಂಪೂರ್ಣ ಆರೋಗ್ಯವನ್ನು ದಯಪಾಲಿಸಿದೆ.
17“ಸಹೋದರರೇ, ನೀವೂ ನಿಮ್ಮ ಅಧಿಕಾರಿಗಳೂ ತಿಳಿಯದೆ ಯೇಸುವಿಗೆ ಹೀಗೆ ಮಾಡಿದಿರೆಂದು ನಾನು ಬಲ್ಲೆ. 18ಕ್ರಿಸ್ತಯೇಸು ಯಾತನೆಯನ್ನು ಅನುಭವಿಸಬೇಕೆಂದು ದೇವರು ಪ್ರವಾದಿಗಳೆಲ್ಲರ ಮುಖಾಂತರ ಆಗಲೇ ಮುಂತಿಳಿಸಿದ್ದರು. ಆ ಪ್ರವಾದನೆಗಳನ್ನು ಈಗ ನೆರವೇರಿಸಿದ್ದಾರೆ. 19ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು. 20ಸರ್ವೇಶ್ವರನ ಸಾನ್ನಿಧ್ಯ ಸೌಭಾಗ್ಯವು ನಿಮ್ಮದಾಗುವುದು; ನಿಮಗೋಸ್ಕರ ನೇಮಿತರಾದ ಉದ್ಧಾರಕ ಯೇಸುವನ್ನು ಕಳುಹಿಸುವರು. 21ಸಮಸ್ತವನ್ನೂ ಪುನರ್ಸ್ಥಾಪನೆಗೊಳಿಸುವವರೆಗೆ ಕ್ರಿಸ್ತಯೇಸು ಸ್ವರ್ಗದಲ್ಲಿಯೇ ಇರಬೇಕಾಗಿದೆ. ಇದನ್ನು ದೇವರು ಪವಿತ್ರ ಪ್ರವಾದಿಗಳ ಮುಖಾಂತರ ಬಹುಕಾಲಕ್ಕೆ ಹಿಂದೆಯೇ ಪ್ರಕಟಿಸಿದ್ದಾರೆ. 22‘ಸರ್ವೇಶ್ವರನಾದ ದೇವರು ನನ್ನನ್ನು ಕಳುಹಿಸಿದಂತೆಯೇ ನಿಮಗೊಬ್ಬ ಪ್ರವಾದಿಯನ್ನು ಕಳುಹಿಸುವರು. ಆತನು ನಿಮ್ಮ ಸ್ವಂತ ಜನಾಂಗದವನಾಗಿರುವನು. ಆತನು ಹೇಳುವುದನ್ನೆಲ್ಲಾ ನೀವು ಕೇಳಬೇಕು. 23ಆ ಪ್ರವಾದಿಗೆ ಕಿವಿಗೊಡದವನು ದೇವಜನರಿಂದ ದೂರವಾಗಿ ನಾಶವಾಗುತ್ತಾನೆ,’ ಎಂದು ಮೋಶೆ ಹೇಳಿದ್ದಾನೆ. 24ಸಮುವೇಲನೂ ಅವನ ನಂತರ ಬಂದ ಎಲ್ಲ ಪ್ರವಾದಿಗಳೂ ಈ ದಿನಗಳಲ್ಲಿ ನಡೆಯುತ್ತಿರುವುದನ್ನು ದೈವದತ್ತವಾಗಿ ಸಾರಿದ್ದಾರೆ. 25ದೇವರು ಪ್ರವಾದಿಗಳ ಮುಖಾಂತರ ಮಾಡಿದ ವಾಗ್ದಾನಗಳಿಗೂ ನಿಮ್ಮ ಪೂರ್ವಜರೊಂದಿಗೆ ಮಾಡಿದ ಒಡಂಬಡಿಕೆಗೂ ನೀವು ಉತ್ತರಾಧಿಕಾರಿಗಳು; ಪೂರ್ವಜ ಅಬ್ರಹಾಮನಿಗೆ, ‘ನಿನ್ನ ಸಂತತಿಯ ಮುಖಾಂತರ ವಿಶ್ವದ ಎಲ್ಲಾ ಜನಾಂಗಗಳು ಧನ್ಯರಾಗುವರು’ ಎಂದಿದ್ದಾರೆ ದೇವರು. 26ಅಂತೆಯೇ, ಅವರು ತಮ್ಮ ದಾಸನನ್ನು ಎಬ್ಬಿಸಿದ್ದಾರೆ. ನಿಮ್ಮೆಲ್ಲರನ್ನು ದುರ್ಮಾರ್ಗದಿಂದ ದೂರಮಾಡಿ ಧನ್ಯರಾಗಿಸಲು ಅವರನ್ನು ಮೊತ್ತಮೊದಲು ನಿಮ್ಮಲ್ಲಿಗೆ ಕಳುಹಿಸಿದ್ದಾರೆ.”
Currently Selected:
ಪ್ರೇಷಿತರ ಕಾರ್ಯಕಲಾಪಗಳು 3: KANCLBSI
Qaqambisa
Share
Copy
![None](/_next/image?url=https%3A%2F%2Fimageproxy.youversionapistaging.com%2F58%2Fhttps%3A%2F%2Fweb-assets.youversion.com%2Fapp-icons%2Fxh.png&w=128&q=75)
Ufuna ukuba iimbalasane zakho zigcinwe kuzo zonke izixhobo zakho? Bhalisela okanye ngena
Kannada C.L. Bible - ಸತ್ಯವೇದವು C.L.
Copyright © 2016 by The Bible Society of India
Used by permission. All rights reserved worldwide.